ಪುಟಗಳು

ಗುರುವಾರ, ಮಾರ್ಚ್ 17, 2022

ಕಾಶ್ಮೀರದ ಕಣ್ಣೀರ ಕಥೆಯ ಮೊದಲ ಕಡತ


ಕಾಶ್ಮೀರದ ಕಣ್ಣೀರ ಕಥೆಯ ಮೊದಲ ಕಡತ


ಕಾಶ್ಮೀರದ ಕಣ್ಣೀರ ಕಥೆಯ ಒಂದು ಕಡತ ಬಹು ಜನ ವೀಕ್ಷಿಸುವ ಮಾಧ್ಯಮದ ಮೂಲಕ ಪ್ರಕಟವಾಗಿದೆ. ಕಾಶ್ಮೀರದ ಕಣ್ಣೀರಿನ ಕಥೆಗಳ ಬಗೆಗೆ ಹಲವು ಲೇಖನಗಳು, ಪುಸ್ತಕಗಳು, ಭಾಷಣಗಳು, ಡಾಕ್ಯುಮೆಂಟರಿಗಳು ಇದ್ದರೂ ಅವು ತಲುಪದ ಜನಸಮೂಹವನ್ನು ಕೂಡಾ ತಲುಪುವ ಶಕ್ತಿ ಇರುವ ಮಾಧ್ಯಮ ಚಲನಚಿತ್ರ. ಹಾಗಾಗಿ ಈ ಬಾರಿ ದೇಶದ್ರೋಹಿ ಶಕ್ತಿಗಳ ಸಕಲ ವಿರೋಧ, ಷಡ್ಯಂತ್ರಗಳ ನಡುವೆಯೂ ಕಾಶ್ಮೀರದ ಹಿಂದೂಗಳ, ಪರಿಸರದ ಮೇಲಿನ ದೌರ್ಜನ್ಯದ ಇತಿಹಾಸದ ಒಂದು ತುಣುಕಾದರೂ ರಾಷ್ಟ್ರೀಯವಾದಿ ಸರಕಾರದ ಅಭಯ ಹಸ್ತದ ನೆರಳಲ್ಲಿ ಚಲನಚಿತ್ರ ಮಾಧ್ಯಮದ ಮೂಲಕ ಬಹು ಸಂಖ್ಯೆಯ ಜನ ಮಾನಸಕ್ಕೆ ತಲುಪುವಂತಾಯಿತು. ಈ ಪ್ರಯತ್ನಕ್ಕಾಗಿ ದುಡಿದವರಿಗೆ ಅಭಿನಂದನೆ ಸಲ್ಲಿಸಲೇಬೇಕು. ಜೊತೆಗೆ ಕ್ರೌರ್ಯವೇ ತುಂಬಿರುವ ಘಟನೆಯನ್ನು ಎಲ್ಲರೂ ನೋಡುವಂತೆ ನಿರೂಪಿಸಿದ ಪರಿಗೂ ಅಭಿನಂದನೆ ಸಲ್ಲಬೇಕು. ಈ ಚಿತ್ರವನ್ನು ನೋಡುವುದು, ಇನ್ನೊಬ್ಬರು ನೋಡುವಂತೆ ಪ್ರೇರೇಪಿಸುವುದು ತನ್ಮೂಲಕ ಹಿಂದೂಗಳಲ್ಲಿ ಜಾಗೃತಿಯನ್ನು ಮೂಡಿಸಿ ಮುಂದೆ ಅಂತಹಾ ಪರಿಸ್ಥಿತಿ ಒದಗದಂತೆ ಪ್ರಯತ್ನಿಸುವುದೇ ನಿಜವಾಗಿ ನಾವು ಸಲ್ಲಿಸಬಹುದಾದ ಅಭಿನಂದನೆ.



ಕಾಶ್ಮೀರದ ಕಣ್ಣೀರಿನ ಕಥೆ ಕಳೆದ ಶತಮಾನದ 90ರ ದಶಕದಲ್ಲಾಗಲೀ ಅಥವಾ 40ರ ದಶಕದಲ್ಲಾಗಲೀ ಪ್ರಾರಂಭವಾದದ್ದಲ್ಲ. ಅದಕ್ಕೆ ಐನೂರು ವರ್ಷಗಳಿಗೂ ಹೆಚ್ಚಿನ ಇತಿಹಾಸವಿದೆ. ಅಂದರೆ "ಕಾಶ್ಮೀರ್ ಫೈಲ್ಸ್" ಕಾಶ್ಮೀರಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯಗಳ ಸಾವಿರದಲ್ಲೊಂದು ಭಾಗವಷ್ಟೇ. ಈ ದೌರ್ಜನ್ಯಗಳಿಗೆಲ್ಲಾ ಮೂಲ ಪುರುಷನೊಬ್ಬನಿದ್ದಾನೆ. ಅವನು ಅದೇ "ಕಾಶ್ಮೀರ್ ಫೈಲ್ಸ್" ಚಿತ್ರದಲ್ಲಿ ನಾಯಕ ನಟ ತನ್ನ ಭಾಷಣದಲ್ಲಿ ಉಲ್ಲೇಖಿಸಿದ ಶಂಸುದ್ದೀನ್ ಅರಾಖಿ. ಕಾಶ್ಮೀರಿಗಳ ಮೇಲಿನ ದೌರ್ಜನ್ಯದ ಕಡತ ಆರಂಭವಾದುದು ಅವನಿಂದ. ಇಸ್ಲಾಂ ಮತದಲ್ಲಿರುವ ಶಾಂತಿದೂತರು, ಜಾತ್ಯಾತೀತರು, ಹಿಂದೂ-ಮುಸ್ಲಿಂ ಸಮನ್ವಯತೆಗೆ ಕಾರಣವಾದವರು, ಸಂತರು ಎಂದು ಭಾರತೀಯರಿಗೆಲ್ಲಾ ಭ್ರಾಂತಿ ಇರುವ, ಸೂಫಿ ವರ್ಗಕ್ಕೆ ಸೇರಿದ ಪೈಶಾಚಿಕ ಪ್ರವೃತ್ತಿಯ ವ್ಯಕ್ತಿ. ಇಸ್ಲಾಂ ಮತ್ತು ಶಾಂತಿ, ಇಸ್ಲಾಂ ಮತ್ತು ಜಾತ್ಯಾತೀತತೆ, ಇಸ್ಲಾಂ ಮತ್ತು ಸಂತ, ಎಂದಾದರೂ ಒಂದಾಗಲು ಸಾಧ್ಯವೇ? ಭಾರತೀಯರ ಭ್ರಮೆ ಕಳಚುವುದೆಂದು? ಅಂದರೆ ಈ ದೌರ್ಜನ್ಯಗಳಿಗೆಲ್ಲಾ ಕಾರಣ ಯಾವುದು? ಅದೇ...ಅದೇ ಪುಸ್ತಕ...ಯಾವುದು ಮತಭ್ರಾಂತತೆಯನ್ನು ಚಿಕ್ಕಪ್ರಾಯದಿಂದಲೂ ಚೊಕ್ಕವಾಗಿ ಮಸ್ತಕಕ್ಕೆ ತುಂಬಿಸಿತೋ ಅದೇ ಗ್ರಂಥ! ಅಸಲಿಗೆ ಗ್ರಂಥ ಎಂದು ಹೇಳಿಸಿಕೊಳ್ಳುವ ಯೋಗ್ಯತೆಯೂ ಅದಕ್ಕಿಲ್ಲ.


ಯಾರು ಈ ಶಂಸುದ್ದೀನ್ ಅರಾಖಿ? ಇತಿಹಾಸಕಾರರಿಂದ ಶಾಂತಿದೂತ ಎಂದು ಕರೆಸಿಕೊಂಡ ಕಾಶ್ಮೀರದ ಸೂಫಿ. ಕಾಶ್ಮೀರ, ಲಢಾಕ್ ಹಾಗೂ ಗಿಲ್ಗಿಟ್-ಬಾಲ್ಟಿಸ್ತಾನಗಳಲ್ಲಿ ಹಿಂದೂ ಹಾಗೂ ಬೌದ್ಧ ದೇವಾಲಯಗಳನ್ನು ನಾಶಪಡಿಸಲು ಮೂಲ ಕಾರಣನಾದ ಮಹಾನ್ ಶಾಂತಿದೂತ. ಕಾಶ್ಮೀರದ ಬಹುತೇಕ ಹಿಂದೂಗಳನ್ನು ಮುಸ್ಲಿಮ್ ಮತಾವಲಂಬಿಗಳನ್ನಾಗಿ ಪರಿವರ್ತಿಸಿದ ಕೀರ್ತಿಯೂ ಅವನದ್ದೇ. ಉತ್ತರ ಇರಾನಿನ ಸೋಲ್ಘನ್ನಿನಲ್ಲಿ 1424ರಲ್ಲಿ ಜನಿಸಿದ ಅರಾಖಿ, ಹೆರಾತ್ ಅನ್ನು ಆಳುತ್ತಿದ್ದ ಮಿರ್ಜಾ ಬಯಕ್ವಾರನ ಆಸ್ಥಾನದಲ್ಲಿದ್ದ. ಅರಸ ಖಾಯಿಲೆ ಬಿದ್ದು ರೋಗ ಉಲ್ಬಣವಾದಾಗ ಅರಾಖಿಯನ್ನು ಔಷಧ ತರಲೆಂದು ಕಾಶ್ಮೀರಕ್ಕೆ ಕಳುಹಿದ. ಕಾಶ್ಮೀರವನ್ನು ತಲುಪಿದ ಅರಾಖಿಗೆ ಎಲ್ಲೆಲ್ಲೂ ಕಾಣಿಸಿದ್ದು ವಿಗ್ರಹಾರಾಧಕ ಹಿಂದೂಗಳು. ನೂರ್-ಬಕ್ಷಿಯಾ ಸೂಫಿ ಶಾಖೆಯವನಾಗಿದ್ದ ಅರಾಖಿ ಕಾಶ್ಮೀರದಲ್ಲಿ ಆಗಲೇ ಬೀಡುಬಿಟ್ಟಿದ್ದ ಹಮದನಿ ಶಾಖೆಯವ ತಾನೆಂದು ಘೋಷಿಸಿಕೊಂಡು ಇಸ್ಲಾಮ್ ಪ್ರಚಾರಕ್ಕೆ ತೊಡಗಿದ. ತನ್ನ ಬೋಧನೆಗಳ ನಡುವೆಯೇ ಕಾಶ್ಮೀರದ ಹಿಂದೂಗಳ ಮೇಲೆ ಜಿಹಾದನ್ನು ಘೋಷಿಸಿದ. ಹಿಂದೂ ದೇವಾಲಯಗಳನ್ನು ನಾಶ ಮಾಡುವ ಪ್ರಚೋದನೆಯನ್ನೂ ನೀಡಿದ. ನೂರ್ ಬಕ್ಷಿಯಾ ಶಾಖೆಯವನೆಂದು ಬಿಂಬಿಸಿಕೊಳ್ಳುತ್ತಲೇ ಶ್ರೀನಗರದಿಂದ ಸ್ಕರ್ಡುವಿನವರೆಗೆ ಸಂಚರಿಸಿ ತನ್ನ ಮತ ಪ್ರಚಾರವನ್ನು ಬಿರುಸಿನಿಂದ ನಡೆಸಿದ. ಕಾಶ್ಮೀರ ಕಣಿವೆ, ಕಾರಕೋರಂ ಪರ್ವತಶ್ರೇಣಿಯ ತಪ್ಪಲು, ಗಿಲ್ಗಿಟ್-ಬಾಲ್ಟಿಸ್ಥಾನಗಳಲ್ಲಿ ಅಪಾರ ಹಿಂಬಾಲಕರನ್ನು ಪಡೆದುಕೊಂಡ. ಅರಾಖಿಯ ಜೊತೆಯಿದ್ದು ಅವನ ಜೀವನದ ಅನೇಕ ಘಟನೆಗಳಿಗೆ ಸಾಕ್ಷಿಯಾದ ಆತನ ಶಿಷ್ಯ ಮಹಮ್ಮದ್ ಅಲಿ ಕಾಶ್ಮೀರಿ ಬರೆದ ಅರಾಖಿಯ ಜೀವನಚರಿತ್ರೆ "ತೋಹಫುತ್-ಉಲ್-ಹಬಾಬ್", ಪರ್ಶಿಯನ್ ಗ್ರಂಥ "ಬಹರಿಸ್ತಾನ್-ಇಲ್- ಶಾಹಿ" ಹಾಗೂ "ತಾರಿಖ್-ಇಲ್-ಕಾಶ್ಮೀರ್"  ಬೆಚ್ಚಿ ಬೀಳಿಸುವ ಅರಾಖಿಯ ಘಾತಕ ಕಾರ್ಯಗಳನ್ನು ಬಿಚ್ಚಿಡುತ್ತವೆ. "ಇಸ್ಲಾಮಿನ ಅತ್ಯುನ್ನತ ಧರ್ಮಗುರುಗಳಲ್ಲಾಗಲೀ, ಸೂಫಿ ಸಂತರಲ್ಲಾಗಲೀ ಶಂಸುದ್ದೀನ್ ಅರಾಖಿಯಂತೆ ವಿಗ್ರಹಗಳನ್ನು ನಾಶಪಡಿಸಿದ, ಇಸ್ಲಾಮನ್ನು ಪ್ರಚುರಪಡಿಸಿದ, ಸಂಖ್ಯಾ ದೃಷ್ಟಿಯಿಂದ ಇಸ್ಲಾಮನ್ನು ಬಲಪಡಿಸಿದವರು ಇನ್ನೊಬ್ಬರಿಲ್ಲ. ವಿಗ್ರಹಾರಾಧಕರನ್ನು ಆವರಿಸಿದ್ದ ಕತ್ತಲನ್ನು ದೂರೀಕರಿಸಲು ಅಡ್ಡಿಯಾದ ಬೃಹದಾಕಾರದ ಸಮಸ್ಯೆಗಳನ್ನು ದೂರೀಕರಿಸಿ ಅವರನ್ನು ಇಸ್ಲಾಮಿನ ತೆಕ್ಕೆಯೊಳಕ್ಕೆ ತರಲು ಅಲ್ಲಾನ ಕೃಪೆಗೆ ಪಾತ್ರರಾದವರು ಅವನಂತೆ ಮತ್ತೊಬ್ಬರಿಲ್ಲ. ಯಾವ ಸುಲ್ತಾನ, ಪಂಡಿತ, ಅಧಿಕಾರಿ, ಸರದಾರರಿಂದ ಮಾಡಲಾಗದಂತಹ ಅತ್ಯುನ್ನತ ಕಾರ್ಯವನ್ನು ಎಸಗಿದ ಶ್ರೇಯ ಆತನೊಬ್ಬನದ್ದೇ!" ಎಂದು “ತೋಹಫುತ್-ಉಲ್-ಹಬಾಬ್” ದಲ್ಲಿ ಕೊಂಡಾಡಿದ್ದಾನೆ ಮಹಮ್ಮದ್ ಅಲಿ ಕಾಶ್ಮೀರಿ.


                ಹರಿ ಪರ್ಬತ್(ಪ್ರದ್ಯುಮ್ನ) ಶಿಖರಾಗ್ರದಲ್ಲಿ ಶಾರಿಕಾ ದೇವಿಯ ದೇವಾಲಯವನ್ನು, ಪಾಶುಪತ ಮಠವನ್ನೂ ಕಾಶ್ಮೀರದ ಅರಸ ರಣಾದಿತ್ಯ ನಿರ್ಮಿಸಿದ್ದ. ತನ್ನರಸನ ವ್ರಣವನ್ನು ಗುಣಪಡಿಸಲು ಔಷಧ ಕೊಂಡು ಹೋಗಲೆಂದು ಬಂದಿದ್ದ ಅರಾಖಿ ಕಾಶ್ಮೀರದ ಹಿಂದೂ ದೇವಾಲಯಗಳಿಗೆ ವ್ರಣವಾಗಿ ಕಾಡಿದ. ಮೊದಲಿಗೆ ಹಮದನಿ ಸೂಫಿಯಂತೆ ಜನರನ್ನು ನಂಬಿಸಿ ಒಂದಷ್ಟು ಹಿಂಬಾಲಕರನ್ನು ಸಂಪಾದಿಸಿದ ಅರಾಖಿ ಬಳಿಕ ಹಿಂದೂ ದೇವಾಲಯಗಳನ್ನು ನಾಶಪಡಿಸುವ ತನ್ನ ಉದ್ದೇಶವನ್ನು ಬಹಿರಂಗವಾಗಿ ವ್ಯಕ್ತಪಡಿಸಲಾರಂಭಿಸಿದ. ತಾನು ಕಾಶ್ಮೀರಕ್ಕೆ ಬಂದುದುದೇ ಹಿಂದೂ ಸಂಪ್ರದಾಯ, ಆಚರಣೆಗಳನ್ನು ಕೊನೆಗೊಳಿಸಲು ಎಂದು ತನ್ನ ಅನುಯಾಯಿಗಳನ್ನು ಹುರಿದುಂಬಿಸಿದ. ಎಲ್ಲಾ ಸೂಫಿ ಪಂಗಡಗಳನ್ನು ಹಾಗವುಗಳ ಅನುಯಾಯಿಗಳಿಗೆ ತನ್ನೊಂದಿಗೆ ಬರಬೇಕೆಂದು ಆಜ್ಞಾಪಿಸಿದ ಅರಾಖಿ ಅವರನ್ನು ಜತೆಗೂಡಿಸಿಕೊಂಡು ನೇರವಾಗಿ ಪ್ರದ್ಯುಮ್ನ ಪರ್ವತವನ್ನು ಏರಲಾರಂಭಿಸಿದ. "ಆ ದೇವಾಲಯದಲ್ಲಿದ್ದ ಪೂಜಾರಿಗಳನ್ನು ಭಕ್ತರನ್ನು ಓಡಿಸಲಾಯಿತು. ನೃತ್ಯ, ಸಂಗೀತ ಹಾಗೂ ವಾದ್ಯಗಾರರನ್ನು ಬಡಿದಟ್ಟಲಾಯಿತು. ಪ್ರಾರ್ಥನಾ ಮಂದಿರವನ್ನು ನಾಶಪಡಿಸಲಾಯಿತು. ಗರ್ಭಗುಡಿಗೆ ಬೆಂಕಿ ಹಚ್ಚಲಾಯಿತು. ಹಿಂದೆ ಪ್ರವಾದಿ ಮಹಮ್ಮದ್ ಮಾಡಿದಂತೆಯೇ ಹರಿ ಪರ್ಬತ್ ಶಿಖರದ ಮೇಲಿದ್ದ ಸಣ್ಣ ಸಣ್ಣಗುಡಿಗಳನ್ನೂ ಬಿಡದೆ ನಾಶಪಡಿಸಲಾಯಿತು. ಮಂದಿರದ ಅವಶೇಷಗಳನ್ನು ಬಳಸಿಕೊಂಡು ಮಸೀದಿ(ಬೈಟ್-ಉಲ್ಲಾ)ಯನ್ನು ನಿರ್ಮಿಸಲು ಅರಾಖಿ ಆಜ್ಞಾಪಿಸಿದ"(ತೋಹಫುತ್-ಉಲ್-ಹಬಾಬ್:ಮಹಮ್ಮದ್ ಅಲಿ ಕಾಶ್ಮೀರಿ).


                 ಜಡಿಬಾಲ್'ನಲ್ಲಿ ಮಸೀದಿಯೊಂದರ ನಿರ್ಮಾಣಕ್ಕಾಗಿ ಮರದ ಅವಶ್ಯಕತೆ ಬಿದ್ದಾಗ ಅರಾಖಿ ನೇರವಾಗಿ ಕಾಮರಾಜ್'ನಲ್ಲಿದ್ದ ಮಹಾಸೇನ(ಮಾಮಲೇಶ್ವರ) ದೇವಾಲಯಕ್ಕೆ ತೆರಳಿದ. ಮಹಾಸೇನ ದೇವಾಲಯ ದೇವದಾರು ವೃಕ್ಷಗಳಿಂದ ಆವೃತವಾಗಿತ್ತು. ಅಲ್ಲಿನ ದೇವದಾರು ವೃಕ್ಷಗಳನ್ನು ಕಡಿಯುವಂತಿರಲಿಲ್ಲ. ಅರಾಖಿ ಮೊದಲು ವಿಗ್ರಹವನ್ನು ಭಂಜಿಸಿ ಬಳಿಕ ದೇವದಾರು ವೃಕ್ಷಗಳನ್ನು ಕಡಿದು ಹಾಕಿದ. ದೇವಾಲಯಕ್ಕೆ ಬೆಂಕಿ ಹಚ್ಚಿ ಅದರ ಅವಶೇಷಗಳನ್ನು ಬಳಸಿಕೊಂಡು ಜಾಮಿಯಾ ಮಸೀದಿಯನ್ನು ನಿರ್ಮಿಸಿದ. ಬಾರಾಮುಲ್ಲಾದಲ್ಲಿ ಕಾಮರಾಜ್ ಪರಗಣ ಎನ್ನುವ ಅಗ್ರಹಾರವೊಂದಿತ್ತು. ಕಾಶ್ಮೀರದ ರಾಜ ಜಲುಕಾ ಕಟ್ಟಿಸಿದ್ದ ಈ ಅಗ್ರಹಾರವನ್ನು ವರಬಲ ಎಂದೇ ಕರೆಯಲಾಗುತ್ತಿತ್ತು. ಕನಕವಾಹಿನಿಯ ಬಲದಂಡೆಯಲ್ಲಿದ್ದ ಈ ಅಗ್ರಹಾರಕ್ಕೆ ನುಗ್ಗಿದ ಅರಾಖಿ ಅಲ್ಲಿನ ದೇವಾಲಯಗಳೆಲ್ಲವನ್ನೂ ನಾಶಗೈದ. ಅಲ್ಲೊಂದು ಮಸೀದಿಯನ್ನು ನಿರ್ಮಿಸಿ ಇಮಾಮ್ ಹಾಗೂ ಮುಜ್ಜೀಯನ್ನು ನೇಮಿಸಿದ. ಆರ್ಕಿಯಾಲಜಿಸ್ಟ್ ಔರೆಲ್ ಸ್ಟೈನ್, ಕನಕವಾಹಿನಿಯ ಈ ಬಲದಂಡೆಯಿಂದ(ಹರ್ ಮುಖ್) ಎರಡು ಮೈಲು ದೂರದ ವಸಿಷ್ಠಾಶ್ರಮದವರೆಗೆ ಸುಮಾರು ಹದಿನೇಳು ದೇವಾಲಯಗಳ ಭಗ್ನಾವಶೇಷಗಳನ್ನು ಪಟ್ಟಿ ಮಾಡಿದ್ದಾನೆ. ಅಲ್ಲೇ ಪಕ್ಕದಲ್ಲಿದ್ದ ನಂದಕೇಶ್ವರ ಅಥವಾ ನಂದರಾಜ ದೇವಾಲಯವೂ ಜಾಮಿಯಾ ಮಸೀದಿಯಾಗಿ ಬದಲಾಯಿತು.


               ಶ್ರೀಭಟ್ ಎನ್ನುವ ಹಿಂದೂವೊಬ್ಬನನ್ನು ಮುಸ್ಲಿಮನನ್ನಾಗಿ ಬದಲಾಯಿಸಿದ ಅರಾಖಿ ಬೋಮರ್'ನ ದೇವಾಲಯವನ್ನು ನಾಶಪಡಿಸಲು ಆತನನ್ನು ಮುಂದಾಳುವಾಗಿ ಕಳುಹಿದ. ಸುಮಾರು ಎರಡು ದಿವಸಗಳ ಕಾಲ ಬೋಮರಿನ ಜನ ತಮ್ಮ ದೇವಾಲಯದ ರಕ್ಷಣೆಗೆ ಪ್ರಾಣವನ್ನೇ ಪಣವಾಗಿಟ್ಟು ಹೋರಾಡಿದರು. ಆದರೆ ಕಪಟ ಕದನದಿಂದ ಗೆದ್ದ ಅರಾಖಿ ದೇವಾಲಯವನ್ನು ನಾಶಮಾಡಿ ಅಲ್ಲಿನ ಮರಗಳನ್ನೆಲ್ಲಾ ಕಡಿದು ಮಸೀದಿಯೊಂದನ್ನು ಕಟ್ಟಿಸಿದ. ಗರ್ಭಗುಡಿಯಲ್ಲಿದ್ದ ವಿಗ್ರಹವನ್ನು ಮಸೀದಿಯ ದ್ವಾರದ ಬಳಿ, ಜನ ತುಳಿದುಕೊಂಡು ಬರಬೇಕೆನ್ನುವ ಉದ್ದೇಶದಿಂದಲೇ ಮೆಟ್ಟಿಲನ್ನಾಗಿ ಹಾಕಲಾಯಿತು. ಇದೇ ಶ್ರೀಭಟ್ಟ ಕಾಮರಾಜ್, ಉತ್ತರಾಶೇರ್, ಬಡಾಕೋಟ್, ಕುಬಿಶೇರ್, ಶಿರಾಜ್, ಕುಪ್ವಾರಾ, ದ್ರಾಂಗ್, ಸೋಪೋರ್, ಬಾರಾಮುಲ್ಲಾಗಳಲ್ಲಿ ದೇವಾಲಯಗಳನ್ನು ನಾಶಮಾಡಿ ಮಸೀದಿಗಳನ್ನು ನಿರ್ಮಿಸಲು ಅರಾಖಿಯ ಬಲಗೈಬಂಟನಂತೆ ಕೆಲಸ ಮಾಡಿದ. ಬಾರಾಮುಲ್ಲಾದ ಬನಿಯಾರಿನಲ್ಲಿದ್ದ ವಿಷ್ಣು ದೇವಾಲಯವನ್ನು ಧ್ವಂಸಗೈದ ಬಳಿಕ ಇಡೀ ಶ್ರೀನಗರ ಪಟ್ಟಣವನ್ನೇ ಕೊಳ್ಳೆಹೊಡೆಯಲಾಯಿತು. ಕಾಮರಾಜ್'ನಲ್ಲಿದ್ದ ರೇಣು, ಕಾಂಡಿರೇಣು, ಬಚ್ಚಿ ರೇಣು ಹಾಗೂ ಸೋಪೋರಿನ ಸತ್ವಾಲ್ ದೇವಾಲಯಗಳನ್ನು ಲೂಟಿ ಮಾಡಿ, ನಾಶ ಮಾಡಿ ಮಸೀದಿಗಳನ್ನಾಗಿ ಪರಿವರ್ತಿಸಿದ್ದು ಶ್ರೀಭಟ್ಟನೇ. ಹಿಂದೂವೊಬ್ಬ ಮತಾಂತರಗೊಂಡರೆ ಶತ್ರುವೊಬ್ಬ ಹೆಚ್ಚಾದಂತೆ ಎಂದ ಸ್ವಾಮಿ ವಿವೇಕಾನಂದರ ಮಾತು ಎಷ್ಟು ನಿಜ!


               ದೋಡಾ(ಉದ್ರಾನ್)ದ ಬಾಖಿ ರೇಣು ದೇವಾಲಯವನ್ನು ಅರಾಖಿಯ ಗುಂಪು ಮುತ್ತಿಗೆ ಹಾಕಿದಾಗ ಸುತ್ತಮುತ್ತಲ ಪ್ರದೇಶದ ಜನ ಕೈಗೆ ಸಿಕ್ಕ ಆಯುಧ ಹಿಡಿದು ಈ ಸೂಫಿಯ ತಂಡವನ್ನು ಎದುರಿಸಿದರು. ಹಲವು ದಿನಗಳ ಘನಘೋರ ಕದನದ ಬಳಿಕ ಸೋತು ಸುಣ್ಣವಾದ ಮತಾಂಧ ಪಡೆ ಅರಾಖಿಯನ್ನು ರಕ್ಷಿಸಿಕೊಳ್ಳಲು ಆತನನ್ನೆತ್ತಿಕೊಂಡು ಜಲ್ದ್ ಗರ್'ನಲ್ಲಿದ್ದ ರಾಜಪ್ರತಿನಿಧಿಯೊಬ್ಬನ(ಮೂಸಾ ರೈನಾ) ಮಗಳ ಮನೆಗೆ ಪರಾರಿಯಾಯಿತು. ಅಲ್ಲಿದ್ದ ಹಿಂದೂ ಕೆಲಸಗಾರರು ಹಾಗೂ ಸುತ್ತಣ ಹಿಂದೂಗಳು ಈ ಮತಾಂಧ ಪಡೆಯ ಮೇಲೆ ಕೊಳಚೆಯನ್ನೆಸೆದು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿತು. ಮೂಸಾ ರೈನಾ ಅರಾಖಿಯನ್ನು ರಕ್ಷಿಸಿದ್ದು ಮಾತ್ರವಲ್ಲ, ಆತನ ಕಾರ್ಯದಲ್ಲೂ ಸಹಾಯಕನಾದ. ಆತ ಪ್ರತಿರೋಧ ತೋರಿದ್ದ ಹಿಂದೂಗಳ ಬಲಾಢ್ಯನಾಯಕರನ್ನು ಪಿತೂರಿ ನಡೆಸಿ ಸೆರೆಮನೆಗೆ ತಳ್ಳಿದ. ಬಹುತೇಕ ಜನರನ್ನು ಕಾಶ್ಮೀರದ ಕಣಿವೆಯೊಳಗೆ ಪ್ರವೇಶಿಸದಂತೆ ರಾಜ್ಯಭೃಷ್ಟತೆಗೆ ಒಳಪಡಿಸಿದ. ಸ್ವಲ್ಪವೂ ಕುರುಹು  ಉಳಿಯದಂತೆ ದೇವಾಲಯವನ್ನು ಸರ್ವನಾಶಗೈಯಲಾಯಿತು. ಮರದ ವಿಗ್ರಹವನ್ನು ಸುಡಲಾಯಿತು. ಮೊದಲ ಬಾರಿಗೆ ಈ ಮಟ್ಟದ ಪ್ರತಿರೋಧವನ್ನು ಎದುರಿಸಿದ ಅರಾಖಿ ತನ್ನ ಕಾರ್ಯವನ್ನು ಧರ್ಮಯುದ್ಧ ಎಂದು ಬಣ್ಣಿಸಿ ಆ ಜಾಗದ ಹೆಸರನ್ನು ಇಸ್ಲಾಮ್ ಪುರ ಎಂದು ಬದಲಾಯಿಸಿದ. ಇದೇ ರೀತಿ ಮಂಕೇಹ್ ರೇಣು ಹಾಗೂ ಜನಕ್ ರೇಣು ದೇವಾಲಯಗಳನ್ನೂ ನಾಶಮಾಡಿ ನಮಾಜ್ ಮಾಡಲು ಅಣಿಗೊಳಿಸಲಾಯಿತು. ಜೋಗಿಗಳ ಯಾತ್ರಾಸ್ಥಳ ರೈನಾವಾರಿಯ ವೇತಾಳನ್ ದೇವಾಲಯ, ತಶ್ವಾನ್, ಉದೇರ್ ನಾಥ್, ಸದಾಸ್ ಮೋಲೋ, ಗಂಗಾಬಲ್ ದೇವಾಲಯಗಳೂ ಅರಾಖಿಯ ನೇತೃತ್ವದಲ್ಲಿ ಧ್ವಂಸಗೊಂಡವು.


                ಕಾಶ್ಮೀರಕ್ಕೆ ಬರುವ ಯಾತ್ರಿಗಳು, ಜೋಗಿಗಳಿಗೆ ದಾಲ್ ಸರೋವರದ ಸಮೀಪವಿದ್ದ ಜೋಗಿ ಲಂಗರ್ ಎನ್ನುವ ಧರ್ಮಶಾಲೆಯೇ ಆಶ್ರಯತಾಣವಾಗಿತ್ತು. ಅದನ್ನು ಕೆಡವಲು ಅರಾಖಿ ಸುಲ್ತಾನ ಫತ್ ಶಾಹನ ಅನುಮತಿ ಕೋರಿದ. ಆದರೆ ತನ್ನಜ್ಜ ಬುದ್ ಶಾಹನಿಂದ ನಿರ್ಮಿತವಾದ ಆ ಧರ್ಮಶಾಲೆಯನ್ನು ಕೆಡವಲು ಆತ ಅನುಮತಿ ನಿರಾಕರಿಸಿದ. ಕುಪಿತನಾದ ಅರಾಖಿ ನ್ಯಾಯ ಸಮಿತಿಯ ಮುಖ್ಯಸ್ಥ ಇಬ್ರಾಹಿಂ ಮೆಗ್ರೇಯಿಂದ ಧರ್ಮಶಾಲೆಯನ್ನು ಕೆಡಹಲು ಆಜ್ಞಾಪತ್ರ ತರಿಸಿಕೊಂಡ. ಸುದ್ದಿ ತಿಳಿದ ಹಿಂದೂಗಳು ಒಟ್ಟಾಗಿ ಹೋರಾಡಿದರೂ ಧರ್ಮಶಾಲೆಯ ಜಾಗದಲ್ಲಿ ಭಯೋತ್ಪಾದಕ ಶಾಲೆ ಮೇಲೆದ್ದು ನಿಂತಿತು! ಅಷ್ಟರಲ್ಲಿ ಸಿಕಂದರನಿಂದ ನಾಶವಾಗಿ ಜೈನುಲ್-ಅಬಿದಿನ್'ನಿಂದ ಪುನರ್ನಿರ್ಮಾಣಗೊಂಡಿದ್ದ ಪಂಡ್ರೆದೆನ್ ಎನ್ನುವ ಮಹಾಲಯದ ಮೇಲೆ ಅರಾಖಿಯ ಕಣ್ಣು ಬಿತ್ತು. ಆ ದೇವಾಲಯವನ್ನು ಸುಟ್ಟು ನಾಶ ಮಾಡಿದರೂ ಅಲ್ಲಿನ ವಿಗ್ರಹವನ್ನು ಕಿಂಚಿತ್ತು ಕೊಂಕಿಸಲೂ ಮತಾಂಧ ಪಡೆ ವಿಫಲವಾಯಿತು. ಕಲ್ಲಿನಿಂದ ಜಜ್ಜಿದರೂ, ಕಬ್ಬಿಣದ ಬಡಿಗೆಯಿಂದ ಬಡಿದರೂ ಅದು ಛಿದ್ರವಾಗಲಿಲ್ಲ. ಕೊನೆಗೆ ಅಲ್ಲೇ ಗುಂಡಿ ತೋಡಿ ಆ ವಿಗ್ರಹವನ್ನು ಮುಚ್ಚಲಾಯಿತು. ಅದರ ಮೇಲೆ ಎರಡು ಮಳಿಗೆಯ ಬೃಹತ್ ಕಟ್ಟಡವೊಂದು ಮೇಲೆದ್ದಿತು. ಬಳಿಕ ಮೇತ್ನಾ ಸ್ಪ್ರಿಂಗ್, ಜ್ವಾಲಾಮುಖಿ, ಖರ್ಬೋಶ್ತಾಜ್, ಖೋದ್ರೇಣು, ಪರ್ಝ್ ದಾನ್, ತ್ಸಾರೇನ್ ಮಲ್, ಜಾಚೋಲ್ದಾರ್, ಕಾಲೇಹ್ ಬೋದ್, ನರ್ವೋರಾ, ವೇಜ್ ನಾಥ್, ಪರ್ಜೆಹ್ಯಾರ್, ಕುದೇರ್, ಅಚ್ಚಾಬಲ್, ಸಾಗಮ್, ಲೋಕೇಹ್, ವೆರಿನಾಗ್ ಮುಂತಾದ ದೇವಾಲಯಗಳು ಅರಾಖಿಯ ಕೈಯಲ್ಲಿ ಬೆಂಕಿಗೆ ಆಹುತಿಯಾದವು.


                 ಕೇವಲ ದೇಗುಲಗಳ ನಾಶ, ಮತಾಂತರ ಮಾತ್ರ ಅರಾಖಿಯ ಕೆಲಸವಾಗಿರಲಿಲ್ಲ. ಹಿಂದೂಗಳು ಮುಸಲ್ಮಾನರ ಮುಂದೆ ಬಾಗಬೇಕಿತ್ತು. ಮುಸಲ್ಮಾನರಿಗೆ ನಮಸ್ಕರಿಸದ ಹಿಂದೂವಿಗೆ ಏಟು ಬೀಳುತ್ತಿತ್ತು. ಹಿಂದೂಗಳು ಒಳ್ಳೆಯ ದಿರಿಸು ಧರಿಸುವಂತಿರಲಿಲ್ಲ. ಮುಸಲ್ಮಾನರು ಧರಿಸುವ ರೀತಿಯ ಬಟ್ಟೆಗಳನ್ನು ತೊಡುವಂತಿರಲಿಲ್ಲ. ಮುಖದಲ್ಲಿ ಸದಾ ದುಃಖ, ಅನಾಥ ಭಾವವನ್ನೇ ಸೂಸುತ್ತಿರಬೇಕಾಗಿತ್ತು. ಒಂದು ಬಾರಿ ಮುಸ್ಲಿಮರಂತೆ ಬಟ್ಟೆ ತೊಟ್ಟಿದ್ದ ಕುದುರೆ ಸವಾರನೊಬ್ಬ ಅರಾಖಿಯ ಮುಂದೆಯೇ ಆತನಿಗೆ ತಲೆ ಬಾಗದೆ ಮುಂದೆ ಸಾಗಿದ. ಆತ ಹಿಂದೂ ಎಂದು ಸ್ಥಳೀಯ ಸೂಫಿಗಳಿಂದ ತಿಳಿದ ಅರಾಖಿ "ಕಾಫಿರನಾದ ಆತ ಯಾಕೆ ಕುದುರೆ ಸವಾರಿ ಮಾಡುತ್ತಿದ್ದಾನೆ? ನಮ್ಮಂತೆ ಒಳ್ಳೆಯ ಬಟ್ಟೆಯನ್ನೇಕೆ ತೊಟ್ಟುಕೊಂಡಿದ್ದಾನೆ? ಆತನನ್ನು ಹಿಡಿದು ತನ್ನಿ" ಎಂದು ಆಜ್ಞಾಪಿಸಿದ. ಕ್ಷಣ ಮಾತ್ರದಲ್ಲಿ ಆತನನ್ನು ಬಂಧಿಸಿ ಕರೆತರಲಾಯಿತು. ಅರಾಖಿಯ ಆದೇಶದಂತೆ ಆತನನ್ನು ಕುದುರೆಯಿಂದ ಕೆಳಗೆಳೆದು ಪ್ರಾಣ ಹೋಗುವಂತೆ ಬಡಿದು ಬೆಟ್ಟದ ಕೆಳಗೆ ತಳ್ಳಲಾಯಿತು. ಇದು ಭಾರತೀಯರು ಆರಾಧಿಸುತ್ತಿರುವ ಸೂಫಿಯೊಬ್ಬನ ದಿನಚರಿ! ಇಂತಹ ಬಹಳಷ್ಟು ಘಟನೆಗಳು ಅರಾಖಿಯ ಜೀವನ ಚರಿತ್ರೆ "ತೋಹಫುತ್-ಉಲ್-ಹಬಾಬ್"ನಲ್ಲಿ ಕಾಣಸಿಗುತ್ತವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ